ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದು, ಆಗಸ್ಟ್ 14ರಂದು ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಾಗಿ ಹೇಳಿದ್ದಾರೆ.
ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಆಗಸ್ಟ್ 14ರಂದು ಉಪಸಭಾಪತಿ ಚುನಾವಣೆ ಮುಗಿದ ತಕ್ಷಣವೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೊರಟ್ಟಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, "ಸಾಂವಿಧಾನಿಕ ಹುದ್ದೆಯನ್ನು ಈ ರೀತಿಯಾಗಿ ಹೈಜಾಕ್ ಮಾಡುವುದು ಸರಿಯಲ್ಲ. ಹೈಕಮಾಂಡ್ ಆದೇಶವಿದೆ, ರಾಜೀನಾಮೆ ಕೊಡಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರೂ ಈ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದಿದ್ದರು" ಎಂದು ಹೇಳಿದರು.
ರಾಜೀನಾಮೆ ನೀಡಿದ ಬಳಿಕವೂ ತಾವು ವಿಧಾನ ಪರಿಷತ್ತಿನ ಸಾಮಾನ್ಯ ಸದಸ್ಯರಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ ಹೊರಟ್ಟಿ, "ನನ್ನ ಮೇಲೆ ಅವಿಶ್ವಾಸ ವ್ಯಕ್ತಪಡಿಸಿರುವುದು ನನಗೆ ತೀವ್ರ ನೋವುಂಟು ಮಾಡಿದೆ. ಇಂತಹ ವಾತಾವರಣದಲ್ಲಿ ಸಭಾಪತಿಯಾಗಿ ಮುಂದುವರಿಯಲು ಇಷ್ಟವಿಲ್ಲ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಸಭಾಪತಿ ಸ್ಥಾನದಿಂದ ಅವರನ್ನು ಬದಲಿಸದಂತೆ ಕೆಲವು ಕಾಂಗ್ರೆಸ್ ಸಚಿವರು ಮನವಿ ಮಾಡಿದ್ದರೂ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾಗಿ ಹೊರಟ್ಟಿ ಹೇಳಿದರು.
PublicNext
06/08/2026 06:05 pm