ಬೆಂಗಳೂರು: ಎಸ್ಬಿಐ (SBI) ನೇತೃತ್ವದ ಬ್ಯಾಂಕ್ಗಳ ಒಕ್ಕೂಟಕ್ಕೆ ₹899.35 ಕೋಟಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದೀಪಕ್ ಕೇಬಲ್ಸ್ ಲಿಮಿಟೆಡ್ಗೆ ಮತ್ತೊಂದು ಬಿಗ್ ಶಾಕ್ ನೀಡಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆ. ವೆಂಕಟೇಶ್ವರ ರಾವ್, ನಿರ್ದೇಶಕಿ ಸತ್ಯವತಿ ಬಾಲ್ ಹಾಗೂ ಸಹವರ್ತಿ ಸಂಸ್ಥೆಗಳ ಹೆಸರಿನಲ್ಲಿದ್ದ ಸುಮಾರು ₹150 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದ್ದಾರೆ.
ದೀಪಕ್ ಕೇಬಲ್ಸ್ ಸಂಸ್ಥೆಯು ಬ್ಯಾಂಕ್ಗಳಿಂದ ಪಡೆದ ಸಾಲವನ್ನು ಉದ್ದೇಶಿತ ಬಳಕೆಗೆ ಬಳಸದೇ, ಅಕ್ರಮವಾಗಿ ಇತರೆ ಖಾತೆಗಳಿಗೆ ವರ್ಗಾಯಿಸಿ ದುರುಪಯೋಗ ಮಾಡಿಕೊಂಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖೆ ನಡೆಸುತ್ತಿದೆ.
ಈ ವರ್ಷದ ಮೇ ತಿಂಗಳಲ್ಲಿ ಇಡಿ ಅಧಿಕಾರಿಗಳು ದೀಪಕ್ ಕೇಬಲ್ಸ್ ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆ ಕಾರ್ಯಾಚರಣೆಯ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾಗೂ ದಾಖಲೆಗಳನ್ನು ಜಪ್ತಿ ಮಾಡಲಾಗಿದ್ದು, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆ. ವೆಂಕಟೇಶ್ವರ ರಾವ್ ಅವರನ್ನು ಬಂಧಿಸಲಾಗಿತ್ತು. ಇದೀಗ ₹150 ಕೋಟಿ ಮೌಲ್ಯದ ಆಸ್ತಿ ಜಪ್ತಿಯೊಂದಿಗೆ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.
PublicNext
06/08/2026 08:33 pm