ಧಾರವಾಡ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಧಾರವಾಡ ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ ಗೊಲ್ಲರ ಆಗ್ರಹಿಸಿದರು.
ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಯಾದವ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು. ಡಿ.ಟಿ. ಶ್ರೀನಿವಾಸ್ ಅವರು ಹಲವು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಸಮರ್ಥ ನಾಯಕತ್ವ ಪ್ರದರ್ಶಿಸಿದ್ದಾರೆ ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ದೊರೆಯಬೇಕಿದೆ. ಹಿಂದುಳಿದ ವರ್ಗಗಳ (ಒಬಿಸಿ) ಪ್ರಭಾವಿ ನಾಯಕರಾಗಿರುವ ಡಿ.ಟಿ. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವುದರ ಜೊತೆಗೆ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಮಾಜದ ಪರವಾಗಿ ಅವರು ಸಲ್ಲಿಸಿರುವ ಸೇವೆ, ಆಡಳಿತಾತ್ಮಕ ಅನುಭವ ಹಾಗೂ ಪಕ್ಷದ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಅವರು ಸಚಿವ ಸಂಪುಟ ವಿಸ್ತರಣೆಯಲ್ಲಿ ಡಿ.ಟಿ. ಶ್ರೀನಿವಾಸ್ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸಂಘ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಗುರುನಾಥ ಹುಲಗೂರ, ಉಪಾಧ್ಯಕ್ಷ ವಿಶಾಲ ಗೌಳಿ, ಗೌರವಾಧ್ಯಕ್ಷ ಕಾಕಾರಂಗ ಸ್ವಾಮಿ, ಸಂಘಟನಾ ಕಾರ್ಯದರ್ಶಿ ಬಾಬು ಗೌಳಿ ಹಾಗೂ ಸದಸ್ಯರಾದ ಭೀಮನಗೌಡ ಕಡ್ಕೊಳ್ ಮತ್ತು ಪ್ರಕಾಶ್ ಗದಗವಾಲೆ ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/08/2026 10:35 pm
LOADING...