ಕೋಲಾರ : ಜನರ ಮನೆಬಾಗಿಲಿಗೆ ಸರ್ಕಾರ: ‘ಪ್ರಜಾಸೇವಾ ಆಂದೋಲನ’ಕ್ಕೆ ಸಚಿವ ಜಿ. ರಾಮಲಿಂಗಾರೆಡ್ಡಿ ಚಾಲನೆ
ಕೋಲಾರ: ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಆಂದೋಲನ’ಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಜಿ. ರಾಮಲಿಂಗಾರೆಡ್ಡಿ ಅವರು ಶನಿವಾರ ಜೂನಿಯರ್ ಕಾಲೇಜು ಆವರಣದಲ್ಲಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ನೂತನವಾಗಿ ‘ಪ್ರಜಾಸೇವಾ ಇಲಾಖೆ’ಯನ್ನು ಸೃಜಿಸಲಾಗಿದ್ದು, ಜನಸಾಮಾನ್ಯರು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಇದೇ ವೇದಿಕೆಯ ಮೂಲಕ ಸಚಿವರು ನಾಡಿನ ಸಮಸ್ತ ಶಿಕ್ಷಕ ಸಮುದಾಯಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈ ಪ್ರಜಾಸೇವಾ ಆಂದೋಲನ ಕೇವಲ ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿರದೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ವಿಸ್ತರಣೆಯಾಗಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ 1 ಮತ್ತು 3ನೇ ಶನಿವಾರ ಹಾಗೂ ಶಾಸಕರ ನೇತೃತ್ವದಲ್ಲಿ ಪ್ರತಿ ಶನಿವಾರ ತಾಲೂಕು ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ಆಯಾ ಇಲಾಖೆಗಳ ಕೌಂಟರ್ಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಬೇಕು. ಕೆರೆ, ರಾಜಕಾಲುವೆ, ರಸ್ತೆ ಒತ್ತುವರಿಯಂತಹ ಕ್ಲಿಷ್ಟಕರ ಸಮಸ್ಯೆಗಳಿಗೆ ಕಾಲಮಿತಿ ನಿಗದಿಪಡಿಸಿ ಪರಿಹಾರ ಒದಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
Kshetra Samachara
05/09/2026 04:23 pm