ಮಡಿಕೇರಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಒಕ್ಕೂಟದ ಪ್ರಮುಖ ಮೋಹನ್ ಮೌರ್ಯ ಅವರು ಮಾತನಾಡಿ, ಸಮಾಜದ ಕೆಳಸ್ತರದ ಬಡ ಹಾಗೂ ಹಿಂದುಳಿದ ಜನರ ಧ್ವನಿಯಾಗಿ, ಅವರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೋರಾಟ ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವ ಮಂಡ್ಯದ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂಬಂಧ ಈಗಾಗಲೇ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಸಂವಿಧಾನದ ಮೂಲಕ ದೇಶದ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ತುಚ್ಛವಾಗಿ ಮಾತನಾಡಿರುವ ವ್ಯಕ್ತಿಯ ವಿರುದ್ಧದ ಹೋರಾಟ ಕೇವಲ ದಲಿತ ಸಮುದಾಯಕ್ಕೆ ಸೀಮಿತವಾಗಬಾರದು ಎಂದರು.
ಅಂಬೇಡ್ಕರ್ ಅವರ ಕುರಿತು ನಡೆಯುತ್ತಿರುವ ಇಂತಹ ಘಟನೆಗಳಿಗೆ ರಾಜಕೀಯ ಮುಖಂಡರು ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
PublicNext
09/09/2026 06:51 am
LOADING...