ಶಿಡ್ಲಘಟ್ಟ: ತಾಲ್ಲೂಕಿನ ಪಲ್ಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಗರನಾಯಕನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಆಕ್ರೋಶಗೊಂಡ ಗ್ರಾಮದ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಕೆಲವು ದಿನಗಳಿಂದ ಕುಡಿಯುವ ನೀರು ಬಂದಿಲ್ಲ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಕುರಿತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆಯರು ಆರೋಪಿಸಿದರು.
ಗ್ರಾಮದಲ್ಲಿರುವ ಮೂರು–ನಾಲ್ಕು ಕೊಳವೆಬಾವಿಗಳಲ್ಲಿ ನೀರು ಲಭ್ಯವಿದ್ದರೂ, ಅವುಗಳಿಗೆ ಪಂಪ್ ಮೋಟಾರ್ ಅಳವಡಿಸಿ ನೀರು ಪೂರೈಸಲು ಪಂಚಾಯಿತಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಗ್ರಾಮದ ಮಹಿಳೆ ಸುಜಾತ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿಗಾಗಿ ಅನಿವಾರ್ಯವಾಗಿ ಖಾಸಗಿ ಟ್ಯಾಂಕರ್ಗಳ ಮೊರೆ ಹೋಗಬೇಕಾಗಿದ್ದು, ಒಂದು ಟ್ಯಾಂಕರ್ ನೀರಿಗೆ ಸುಮಾರು ₹1,500ರಿಂದ ₹2,000 ವರೆಗೆ ಹಣ ಪಾವತಿಸಬೇಕಾಗಿದೆ. ಇದರಿಂದ ಬಡ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ, ಇದುವರೆಗೆ ಮನೆಮನೆಗೂ ಸಮರ್ಪಕವಾಗಿ ಕುಡಿಯುವ ನೀರು ಹರಿಸಲಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
09/09/2026 10:51 pm
LOADING...