ಕೋಲಾರ : ಗೌರಿ ಗಣೇಶ ಹಬ್ಬವನ್ನು ಎಲ್ಲರೂ ಒಟ್ಟಾಗಿ ಆಚರಿಸಿ ಸೌಹಾರ್ದ ವಾತಾವರಣ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದರು. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಬ್ಬದ ನೆಪದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಾಗೂ ಯಾರಿಗೂ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸುಗಮವಾಗಿ ಅನುಮತಿ ನೀಡುವ ಉದ್ದೇಶದಿಂದ ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಏಕಗವಾಕ್ಷಿ ವ್ಯವಸ್ಥೆ’ (ಸಿಂಗಲ್ ವಿಂಡೋ ಸಿಸ್ಟಮ್) ಜಾರಿಗೊಳಿಸಲಾಗುತ್ತಿದೆ. ಆಯೋಜಕರು ಕಡ್ಡಾಯವಾಗಿ ತಮ್ಮ ಆಧಾರ್, ರೇಷನ್ ಕಾರ್ಡ್ ಅಥವಾ ವೋಟರ್ ಕಾರ್ಡ್ ಲಗತ್ತಿಸಿ ಏಕಕಾಲದಲ್ಲಿ ಅನುಮತಿ ಪಡೆಯಬಹುದಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಯ ಎತ್ತರವನ್ನು ಗರಿಷ್ಠ 5 ಅಡಿಗಳಿಗೆ ಸೀಮಿತಗೊಳಿಸಲಾಗಿದ್ದು, ಟ್ರಾನ್ಸ್ಫಾರ್ಮರ್ಗಳ ಬಳಿ, ನೀರಿನ ಟ್ಯಾಂಕ್ ಕೆಳಗಡೆ, ರಸ್ತೆ ಮಧ್ಯದಲ್ಲಿ ಹಾಗೂ ಯಾವುದೇ ವಿವಾದಿತ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.
ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ದಿನದ 24 ಗಂಟೆಯೂ ಆಯೋಜಕರು ತಮ್ಮದೇ ಆದ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದರು.
Kshetra Samachara
11/09/2026 02:44 pm