ತಾಳಿಕೋಟಿ: ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಕಳೆದ 9 ದಿನಗಳಿಂದ ನಡೆಯುತ್ತಿರುವ ರೈತರ ಧರಣಿಗೆ ಶುಕ್ರವಾರ ತಾಳಿಕೋಟಿಯ ನ್ಯಾಯವಾದಿಗಳು ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಗಂಗಾಧರ ಕಸ್ತೂರಿ, ಪ್ರಭಾಕರ ಗುಡಗುಂಟಿ ಹಾಗೂ ಸಂತೋಷ್ ತಳ್ಳೊಳ್ಳಿ ಮಾತನಾಡಿ, ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ಸೇರಿದಂತೆ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಶೀಘ್ರವೇ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ತನ್ನ ಮುಂದಿನ ಬರಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಇಡೀ ವಿಜಯಪುರ ಜಿಲ್ಲೆಯನ್ನು ಸೇರ್ಪಡೆಗೊಳಿಸದಿದ್ದರೆ, ರೈತರು ಅನಿವಾರ್ಯವಾಗಿ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಜಿಲ್ಲೆಯ ವಕೀಲರು ರೈತರೊಂದಿಗೆ ನಿಂತು ಕಾನೂನು ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಎಂ.ಆರ್. ಪಾಟೀಲ, ಎಂ.ಬಿ. ಅಸ್ಕಿ, ಎಸ್.ಎಸ್. ಹಾಲಣ್ಣವರ, ಎಸ್.ಎಂ. ಕಿಣಗಿ, ಎಂ.ಬಿ. ಕಟ್ಟಿಮನಿ, ಸಿ.ಸಿ.ಎಸ್. ಚಲವಾದಿ, ಎಂ.ಬಿ. ದೊಡ್ಡಮನಿ, ಬಸವರಾಜ ಕಟ್ಟಿಮನಿ, ಎಸ್.ಬಿ. ನಾರಿ, ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಉಪಸ್ಥಿತರಿದ್ದರು.
PublicNext
11/09/2026 06:22 pm
LOADING...