ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಮೂಲಕವೇ ಸಾಧ್ಯ ಎಂದು ಕನಸು ಕಂಡು, ಬಡವರು ಹಾಗೂ ದೀನ ದಲಿತರ ಧ್ವನಿಯಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ದಿನಕರ ದೇಸಾಯಿ ಎಂದು ಹಿರಿಯ ಸಾಹಿತಿ ತಮ್ಮಣ್ಣ ಬೀಗಾರ ಹೇಳಿದರು.
ದಿನಕರ ದೇಸಾಯಿ ಅವರ ಜನ್ಮದಿನಾಚರಣೆ ಅಂಗವಾಗಿ ಜನತಾ ವಿದ್ಯಾಲಯ, ಬೇಡ್ಕಣಿಯಲ್ಲಿ ಆಯೋಜಿಸಿದ್ದ ಭಾಷಣ, ಭಾವಗೀತೆ ಸ್ಪರ್ಧೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಬಹುಮುಖಿ ದಿನಕರ ದೇಸಾಯಿ’ ವಿಷಯದ ಕುರಿತು ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಕೆ. ನಾಯ್ಕ ಹೊಸ್ಕೊಪ್ಪ ಉಪನ್ಯಾಸ ನೀಡಿ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನವ ಸಮಾಜ ನಿರ್ಮಾಣಕ್ಕೆ ಕಾರಣರಾದ ದಿನಕರ ದೇಸಾಯಿ ಅವರು ಜಿಲ್ಲೆಯ ಅನರ್ಘ್ಯ ರತ್ನ ಎಂದು ಬಣ್ಣಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಅವರು ಕಸಾಪದ ಕಾರ್ಯಚಟುವಟಿಕೆಗಳು ಹಾಗೂ ದಿನಕರ ದೇಸಾಯಿ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಸೇವೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ರತ್ನಾಕರ ಪಾಲೇಕರ್, ಕಸಾಪ ಗೌರವ ಕೋಶಾಧ್ಯಕ್ಷ ಪಿ.ಬಿ. ಹೊಸೂರು ಹಾಗೂ ಜನತಾ ವಿದ್ಯಾಲಯದ ಮುಖ್ಯ ಶಿಕ್ಷಕಿ ಪ್ರತಿಮಾ ಪಾಲೇಕರ್ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿ.ಎನ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು.
ಭಾಷಣ ಹಾಗೂ ಭಾವಗೀತೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 2025-26ನೇ ಸಾಲಿನಲ್ಲಿ ವಿದ್ಯಾಲಯದಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿ ಹಾಗೂ ಶಾಲೆಯ ಬೋಧಕ ವೃಂದವನ್ನು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸೇವಾ ಸಂಕಲ್ಪ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.
ಕಸಾಪ ಕಾರ್ಯದರ್ಶಿ ಅಣ್ಣಪ್ಪ ನಾಯ್ಕ ಶಿರಳಗಿ ಸ್ವಾಗತಿಸಿದರು. ಶಿಕ್ಷಕ ಶಿವಶಂಕರ್ ವಂದಿಸಿದರು. ಶಿಕ್ಷಕ ಪಿ.ಎಂ. ನಾಯ್ಕ ನಿರೂಪಿಸಿದರು.
Kshetra Samachara
11/09/2026 07:39 pm