ಯಾದಗಿರಿ: ಆಟೋ ಚಾಲನೆ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ನಡೆದಿದೆ. ಆಟೋವನ್ನು ಸರಿಯಾಗಿ ಚಾಲನೆ ಮಾಡಿ ಎಂದು ಬುದ್ಧಿಮಾತು ಹೇಳಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಗುರುಸಣಗಿ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಈ ಘಟನೆ ನಡೆದಿದೆ.
ಚಾಮನಳ್ಳಿ ಗ್ರಾಮದಿಂದ ದಲಿತ ಸಮುದಾಯದ ಭಕ್ತರು ದೇವರ ದರ್ಶನಕ್ಕೆ ಬಂದಿದ್ದರು. ದರ್ಶನ ಮುಗಿಸಿಕೊಂಡು ವಾಪಸ್ ತೆರಳುವ ವೇಳೆ, ಆಟೋ ರಿವರ್ಸ್ ಪಡೆಯುತ್ತಿದ್ದಾಗ ಬಾಲಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಗುರುಸಣಗಿ ಗ್ರಾಮಸ್ಥರು, ಆಟೋವನ್ನು ಸರಿಯಾಗಿ ಚಾಲನೆ ಮಾಡುವಂತೆ ಬುದ್ಧಿಮಾತು ಹೇಳಿದ್ದಾರೆ.
ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಯ ವೇಳೆ ಕೆಲವರು “ಹೊಡೆಯಬೇಡಿ” ಎಂದು ಕಣ್ಣೀರಿಟ್ಟು ಅಂಗಲಾಚಿದರೂ, ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಎರಡೂ ಗುಂಪಿನ ಒಟ್ಟು ಎಂಟು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PublicNext
14/09/2026 02:01 pm
LOADING...