ಶಿವಮೊಗ್ಗ: ಕಾರು ಚಾಲನೆ ಮಾಡುತ್ತಿದ್ದ ವೇಳೆ ಮಗು ಕರೆದಿದ್ದರಿಂದ ಹಿಂದೆ ತಿರುಗಿ ನೋಡಲು ಹೋಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೇರಿಯಲ್ಲಿ ನಡೆದಿದೆ.
ಸ್ಥಳೀಯರ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ತಾಯಿ ಹಾಗೂ ಮಗು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.ದಾವಣಗೆರೆಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಮಣಿಪಾಲದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆ ಕಾರು ಚಾಲನೆ ಮಾಡುತ್ತಿದ್ದು, ಅವರ ಜೊತೆ 6 ವರ್ಷದ ಮಗುವೂ ಇತ್ತು. ಪ್ರಯಾಣದ ಮಧ್ಯೆ ಮಗು ಕರೆದಾಗ ಮಹಿಳೆ ಹಿಂದೆ ತಿರುಗಿ ನೋಡಿದ್ದು, ಈ ವೇಳೆ ಚಾಲಕಿಯ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು, ಕಾರಿನಲ್ಲಿದ್ದ ತಾಯಿ ಹಾಗೂ ಮಗುವನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸಿದ್ದಾರೆ.
ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ಭೀಕರ ದುರಂತ ಸಂಭವಿಸುವ ಸಾಧ್ಯತೆಯಿತ್ತು. ಈ ರಸ್ತೆ ಬದಿಯಲ್ಲಿ ಸೂಕ್ತ ತಡೆಗೋಡೆ ನಿರ್ಮಿಸದೇ ಇರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
16/09/2026 11:32 am
LOADING...