ಶಿವಮೊಗ್ಗ: ನಗರದ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ಪೊಲೀಸ್ ಇಲಾಖೆಯ 'ಅಕ್ಕ ಪಡೆ'ಯ ಮಹಿಳಾ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನು ಅಲ್ಲಿದ್ದ ಯುವತಿಯ ಜೊತೆ ಸಾರ್ವಜನಿಕವಾಗಿ ಅತ್ಯಂತ ಅನುಚಿತವಾಗಿ ವರ್ತಿಸುತ್ತಿದ್ದನು. ಇದನ್ನು ಗಮನಿಸಿದ ಅಕ್ಕ ಪಡೆಯ ಮಹಿಳಾ ಸಿಬ್ಬಂದಿ, ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆ ಮತ್ತು ಮುಂದಿನ ಕಾನೂನು ನಡಾವಳಿಗಳಿಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆತಂದು ಹಸ್ತಾಂತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ 'ಲಘು ಪ್ರಕರಣ' ದಾಖಲಿಸಿಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಮಹಿಳೆಯರು ಹಾಗೂ ಯುವತಿಯರ ಸುರಕ್ಷತೆಗೆ ಧಕ್ಕೆ ತರುವಂತೆ ನಡೆದುಕೊಂಡರೆ ಅಥವಾ ಪುಂಡಾಟ ನಡೆಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗಾಗಿ 'ಅಕ್ಕ ಪಡೆ'ಯ ಗಸ್ತು ಕಾರ್ಯ ನಗರದಾದ್ಯಂತ ನಿರಂತರವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kshetra Samachara
16/09/2026 01:23 pm
LOADING...