ಹಾನಗಲ್: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಶಾಸಕರು–ಸಂಸದರು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿಯಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಹಾಗೂ ಮಾರನಬೀಡ ಗ್ರಾಮಗಳಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಸ್ಥಳೀಯ ಮಟ್ಟದಲ್ಲೇ ಗುಣಮಟ್ಟದ ಪ್ರಾಥಮಿಕ ಚಿಕಿತ್ಸೆ ಸಿಗಬೇಕು. ನೂತನ ಕೇಂದ್ರಗಳ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದರು.
ರಾಜ್ಯದಲ್ಲಿ ಬರ ಘೋಷಣೆ ಹಾಗೂ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ ಬೊಮ್ಮಾಯಿ, ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜಕೀಯ ಬದಿಗಿಟ್ಟು ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ನೀಗಿಸುವುದು ಸರ್ಕಾರದ ಪ್ರಮುಖ ಸವಾಲಾಗಿದೆ ಎಂದರು.
ಆಯುಷ್ಮಾನ್ ಯೋಜನೆಯಡಿ ಬಡವರಿಗೆ ₹5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆ ಲಭ್ಯವಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಸಿಆರ್ಎಫ್ ಅನುದಾನ ನೀಡುವಂತೆ ಮನವಿ ಮಾಡಿದ್ದು, 8 ಕ್ಷೇತ್ರಗಳಿಗೆ ₹60 ಕೋಟಿಗೂ ಅಧಿಕ ಅನುದಾನ ಕೇಳಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ, ಸೇರಿದಂತೆ ಹಲವು ಗಣ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
-ಲೋಕೇಶ್ ಸುಣಗಾರ್, ಪಬ್ಲಿಕ್ ನೆಕ್ಸ್ಟ್ ಹಾನಗಲ್
PublicNext
16/09/2026 11:53 pm
LOADING...