ಕಲಬುರಗಿ : ನಗರದ ಹೈಕೋರ್ಟ್ ಕ್ರಾಸ್ ಬಳಿ ಸೆ.16ರ ರಾತ್ರಿ ಏಳೆಂಟು ಜನರ ಗುಂಪು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿದೆ. ಯಾವುದೇ ರೀತಿಯ ಅನುಮತಿ ಪಡೆಯದೆ ಪ್ರತಿಮೆ ಪ್ರತಿಷ್ಠಾಪಿಸಲಾಗಿದ್ದು, ಮಾಹಿತಿ ತಿಳಿದ ಮಹಾನಗರ ಪಾಲಿಕೆ ಸಿಬ್ಬಂದಿ ಪೊಲೀಸ್ ಭದ್ರತೆಯಲ್ಲಿ ಅದನ್ನು ತೆರವುಗೊಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲಬುರಗಿ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಪ್ರತಿಮೆ ಸ್ಥಾಪಿಸಿರುವುದು ಗಮನ ಸೆಳೆದಿದೆ. ಇದೇ ಮಾರ್ಗದಲ್ಲಿ ಮುಖ್ಯಮಂತ್ರಿ ತೆರಳಲಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಕ್ರಾಸ್ ಬಳಿ ಪ್ರತಿಮೆ ಸ್ಥಾಪಿಸಲಾಗಿತ್ತು.
ಅನುಮತಿ ಪಡೆಯದೆ ಪ್ರತಿಮೆ ಸ್ಥಾಪಿಸಿರುವುದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡು ಅದನ್ನು ತೆರವು ಮಾಡಿದ್ದಾರೆ. ಈ ಹಿಂದೆ ಕೂಡ ಕಲಬುರಗಿ ನಗರದಲ್ಲಿ ಯಾವುದೇ ಅನುಮತಿ ಇಲ್ಲದೆ ಸಿದ್ದರಾಮಯ್ಯ ಅವರ ಭಾವಚಿತ್ರದ ಬ್ಯಾನರ್ ಅಳವಡಿಸಿ, ಸಿದ್ದರಾಮಯ್ಯ ಸರ್ಕಲ್ ನಿರ್ಮಿಸಲಾಗಿತ್ತು.
ಎರಡು-ಮೂರು ವರ್ಷಗಳ ಹಿಂದೆ ನಡೆದಿದ್ದ ಆ ಘಟನೆಯಲ್ಲಿಯೂ ಅನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದ್ದು, ಇದೀಗ ಮತ್ತೆ ಅನುಮತಿ ಇಲ್ಲದೆ ಸಿದ್ದರಾಮಯ್ಯ ಪ್ರತಿಮೆ ಸ್ಥಾಪಿಸಲಾಗಿತ್ತು. ಪೊಲೀಸ್ ಬಂದೋಬಸ್ತ್ನಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.
PublicNext
17/09/2026 12:02 pm
LOADING...