ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಆಹ್ವಾನಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾ. ಬಿ.ವಿ. ನಾಗರತ್ನ ಅವರ ಹೆಸರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಪರಿಗಣಿಸುವಂತೆ ಮನವಿ ಮಾಡಿದ್ದಾರೆ.
ಮೈಸೂರು ದಸರಾ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಅಂತಾರಾಷ್ಟ್ರೀಯ ಉತ್ಸವವಾಗಿದೆ. ನಾಡಿನ ಕೀರ್ತಿಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಎತ್ತಿಹಿಡಿದ ಗಣ್ಯರಿಂದ ದಸರಾ ಉದ್ಘಾಟನೆ ಮಾಡಿಸುವ ಪರಂಪರೆ ನಡೆದುಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ನ್ಯಾ. ಬಿ.ವಿ. ನಾಗರತ್ನ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅತ್ಯಂತ ಅರ್ಥಪೂರ್ಣವಾಗಲಿದೆ ಎಂದು ದಿನೇಶ್ ಗೂಳಿಗೌಡ ಪತ್ರದಲ್ಲಿ ತಿಳಿಸಿದ್ದಾರೆ.
2027ರ ಸೆಪ್ಟೆಂಬರ್ 25ರಂದು ಭಾರತದ ಪ್ರಥಮ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ನ್ಯಾ. ಬಿ.ವಿ. ನಾಗರತ್ನ ಅವರು ದೇಶದ ನ್ಯಾಯಾಂಗ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಲಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.
“ಮಂಡ್ಯದ ಮಗಳಿಗೆ ಮೈಸೂರು ದಸರಾ ಉದ್ಘಾಟನೆಯ ಗೌರವ ನೀಡುವುದರಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಸಂದೇಶ ರವಾನಿಸಿದಂತಾಗುತ್ತದೆ. ನ್ಯಾಯಾಂಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿರುವ ನ್ಯಾ. ಬಿ.ವಿ. ನಾಗರತ್ನ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವ ಮೂಲಕ ರಾಜ್ಯವು ವಿಶೇಷ ಗೌರವ ಸಲ್ಲಿಸಬೇಕು” ಎಂದು ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.
PublicNext
17/09/2026 08:32 pm
LOADING...