ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಮೋದಿ ಜನ್ಮದಿನಾಚರಣೆ : ಬಿಜೆಪಿಯಿಂದ ಸೇವಾ ಸಂಕಲ್ಪ ಅಭಿಯಾನ

ತುಮಕೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರು ಸಾಂವಿಧಾನಿಕ ಅಧಿಕಾರದ ಜವಾಬ್ದಾರಿ ವಹಿಸಿಕೊಂಡು 25ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ನೇತೃತ್ವದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ನಗರದ ಸಂಸದರ ಕಚೇರಿ ಆವರಣದಲ್ಲಿ ಜಿಲ್ಲಾ ಬಿಜೆಪಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಹಲವು ದೇಶಗಳಲ್ಲಿ ಅವರ ಅಭಿಮಾನಿಗಳು ವಿಶೇಷವಾಗಿ ಆಚರಿಸುತ್ತಿದ್ದಾರೆ. ವಿಶ್ವನಾಯಕ ಮೋದಿಯವರು ಭಾರತದ ಘನತೆಯನ್ನು ವಿಶ್ವ ಮಟ್ಟದಲ್ಲಿ ಸಾರಿದ್ದಾರೆ. ದೇಶದ ಎಲ್ಲಾ ವರ್ಗದ ಜನರ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ವಿಕಸಿತ ಭಾರತ ನಿರ್ಮಾಣದ ಕನಸನ್ನು ಸಾಕಾರಗೊಳಿಸಲು ಮೋದಿಯವರ ಅಭಿವೃದ್ಧಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಹಾಗೂ ಜನಕಲ್ಯಾಣ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮಾಡುವುದು. ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು, ಸೌಲಭ್ಯಗಳು ಮತ್ತು ಫಲಾನುಭವಿಗಳ ಅರ್ಹತೆಗಳ ಕುರಿತು ಸಾರ್ವಜನಿಕರಿಗೆ ನೇರವಾಗಿ ಮಾಹಿತಿ ನೀಡಿ, ಅರ್ಹರಿಗೆ ಸ್ಥಳದಲ್ಲಿಯೇ ಅಗತ್ಯ ಮಾರ್ಗದರ್ಶನ ಹಾಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಲಾಗಿದೆ ಎಂದು ಹೇಳಿದರು.

ಸೇವಾ ಸಂಕಲ್ಪ ಅಭಿಯಾನದ ಕಾರ್ಯಕ್ರಮವಾಗಿ ಸರ್ಕಾರದ ಯೋಜನೆಗಳು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಬೇಕು ಎಂಬುದು ಸೇವಾ ಸಂಕಲ್ಪ ಅಭಿಯಾನದ ಪ್ರಮುಖ ಆಶಯವಾಗಿದೆ. ಒಂದು ತಿಂಗಳ ಕಾಲ ವಿವಿಧ ಸೇವಾ, ಆರೋಗ್ಯ, ಸಾಮಾಜಿಕ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ವಿಶ್ವ ಕಂಡ ಶ್ರೇಷ್ಠ ನಾಯಕ ನರೇಂದ್ರ ಮೋದಿಯವರು ತಮ್ಮ 25 ವರ್ಷಗಳ ಸಾರ್ವಜನಿಕ ಕ್ಷೇತ್ರದಲ್ಲಿ ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸುವ ಕಾರ್ಯಕ್ರಮವಾಗಿ ಸೇವಾ ಸಂಕಲ್ಪ ಅಭಿಯಾನ ಆರಂಭಿಸಿ, ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು, ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಶಾಸಕ ಬಿ. ಸುರೇಶ್‌ಗೌಡರು ಮಾತನಾಡಿ, ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ವಜನಿಕ ಬದುಕು ಮಾದರಿಯಾಗಿದೆ. ಇಡೀ ದೇಶ ಹೆಮ್ಮೆಯಿಂದ ಅವರ ಸೇವೆಯನ್ನು ಸಂಭ್ರಮಿಸಿ ಕೊಂಡಾಡುತ್ತಿದೆ. ಬಲಿಷ್ಠ ಭಾರತ ನಿರ್ಮಾಣದ ಮೋದಿಯವರ ಕನಸನ್ನು ನನಸು ಮಾಡಲು ದೇಶದ ಜನ ಸಹಕಾರ ನೀಡಬೇಕು ಎಂದು ಹೇಳಿದರು.

ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ವಿವಿಧ ಕ್ಷೇತ್ರಗಳ 25 ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಮತ್ತಿತರ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಾಜಿ ಶಾಸಕರಾದ ಡಾ. ಹುಲಿನಾಯ್ಕರ್, ಮಸಾಲಾ ಜಯರಾಮ್, ಎಂ.ಡಿ. ಲಕ್ಷ್ಮೀನಾರಾಯಣ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ, ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಅಂಬಿಕಾ ಹುಲಿನಾಯ್ಕರ್, ಬ್ಯಾಟರಂಗೇಗೌಡ, ಜೆಡಿಎಸ್ ಮುಖಂಡ ಗುಬ್ಬಿ ನಾಗರಾಜು, ದಿಲೀಪ್ ಕುಮಾರ್, ಎಸ್.ಪಿ. ಚಿದಾನಂದ್, ಬಿ.ಹೆಚ್. ಅನಿಲ್ ಕುಮಾರ್, ಡಾ. ಪರಮೇಶ್, ಭೈರಣ್ಣ, ರುದ್ರೇಶ್, ನಂಜೇಗೌಡ, ಪ್ರಕಾಶ್, ಟಿ.ಹೆಚ್. ಹನುಮಂತರಾಜು, ಹೆಚ್.ಎಂ. ರವೀಶಯ್ಯ, ವೇದಮೂರ್ತಿ, ಧನುಷ್, ಡಾ. ದರ್ಶನ್ ಕೆ.ಎಲ್., ಆರ್.ಸಿ. ಆಂಜನಪ್ಪ, ಟಿ.ಆರ್. ನಾಗರಾಜ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

18/09/2026 08:22 am

Cinque Terre

380

Cinque Terre

0

ಸಂಬಂಧಿತ ಸುದ್ದಿ