ತರೀಕೆರೆ : ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಕಡವೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಕ್ವಾರ್ಟರ್ಸ್ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, ಘಟನಾ ಸ್ಥಳದಲ್ಲಿದ್ದ ಇತರ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಎಂ.ಸಿ.ಹಳ್ಳಿ ಕ್ವಾರ್ಟರ್ಸ್ ನಿವಾಸಿಗಳಾದ ಕಿರಣ್ ಕುಮಾರ್, ಗೋವಿಂದರಾಜು ಹಾಗೂ ಭದ್ರಾವತಿ ಮೂಲದ ಸೀತಾರಾಮಪುರದ ಮಣಿಕಂಠ ಬಂಧಿತ ಆರೋಪಿಗಳು. ಎಂ.ಸಿ.ಹಳ್ಳಿ ಕ್ವಾರ್ಟರ್ಸ್ನ ಪ್ರವೀಣ ಪ್ರಭು ಸೇರಿದಂತೆ ತಲೆಮರೆಸಿಕೊಂಡಿರುವ ನಾಲ್ವರ ವಿರುದ್ಧವೂ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ, ಆರೋಪಿಗಳಿಂದ ಬರೋಬ್ಬರಿ 70 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಪ್ರಾಣಿ ವಧೆಗಾಗಿ ಬಳಸಲಾಗಿದ್ದ ಕತ್ತಿ, ಚಾಕು, ಚೂರಿ, ಹಣೆಯ ಬ್ಯಾಟರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಾರಿಯಾಗಿರುವ ಉಳಿದ ನಾಲ್ವರು ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ತೀವ್ರ ಶೋಧ ನಡೆಸುತ್ತಿದೆ.
PublicNext
18/09/2026 12:46 pm
LOADING...