ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ - ವೀರಯ್ಯ ಮಠಪತಿ

ಶಿರಹಟ್ಟಿ : “ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಅನ್ನಭಾಗ್ಯ: ರೇಷನ್‌ ಕಾರ್ಡ್ ವಂಚಿತರಾಗದಂತೆ ಕ್ರಮಕ್ಕೆ ಸೂಚನೆ

ಯಾವುದೇ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಪಡೆಯುವಲ್ಲಿ ವಂಚಿತರಾಗಬಾರದು. ಕೆಲವು ತಾಂತ್ರಿಕ ಕಾರಣಗಳಿಂದ ಪಡಿತರ ಚೀಟಿ ಪಡೆಯಲು ಸಾಧ್ಯವಾಗದವರನ್ನು ಪತ್ತೆಹಚ್ಚಿ ಪರಿಹಾರ ಒದಗಿಸಬೇಕು ಎಂದು ಆಹಾರ ಇಲಾಖೆಯ ಶಿರಸ್ತೇದಾರ್ ಶಾಂತಾ ಚವಡಿ ಅವರಿಗೆ ಸಮಿತಿ ಅಧ್ಯಕ್ಷರು ತಿಳಿಸಿದರು. ಈ ವೇಳೆ ಸಮಿತಿ ಸದಸ್ಯ ಶಿವನಗೌಡ ಪಾಟೀಲ ಅವರು ಸೂಕ್ತ ಸಲಹೆಗಳನ್ನು ನೀಡಿದರು.

ಗೃಹಲಕ್ಷ್ಮಿ ಯೋಜನೆಯಿಂದ ಇನ್ನೂ ವಂಚಿತರಾದ ಫಲಾನುಭವಿಗಳನ್ನು ಹುಡುಕಿ, ಅವರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರುವಂತೆ ಮಾಡಬೇಕು ಮತ್ತು ಅದರಲ್ಲಿ ಇರುವ ಸಣ್ಣಪುಟ್ಟ ಲೋಪದೋಷಗಳನ್ನು ಬಗೆಹರಿಸಬೇಕು ಎಂದರು. ಈ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಂದ ಯಾವುದೇ ದೂರು ಬರದಂತೆ ಎಚ್ಚರಿಕೆ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.

ಶಕ್ತಿ ಯೋಜನೆ: ಶಾಲಾ ಮಕ್ಕಳಿಗೆ ಬಸ್ ಸಮಸ್ಯೆ ನಿವಾರಿಸಲು ಒತ್ತಾಯ

ಸಾರಿಗೆ ಘಟಕ ವ್ಯವಸ್ಥಾಪಕಿ ಮಹೇಶ್ವರಿ ಪತ್ತಾರ ಅವರು ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು. “ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಮಹಿಳೆಯರ ಉಚಿತ ಪ್ರಯಾಣದ ಅತಿಯಾದ ಒತ್ತಡದಿಂದಾಗಿ ಶಾಲಾ-ಕಾಲೇಜು ಮಕ್ಕಳು ಬಸ್ ಸಿಗದೆ ಹೈರಾಣಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ನಿಗದಿತ ಸಮಯಕ್ಕೆ ಶಾಲೆ ತಲುಪಲು ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸಬೇಕು ಮತ್ತು ಸಮಯಕ್ಕೆ ಸರಿಯಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಬೇಕು” ಎಂದು ಸದಸ್ಯರು ಒತ್ತಾಯಿಸಿದರು.

ಗೃಹಜ್ಯೋತಿ: ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ವಿದ್ಯುತ್‌ ಲೋಡ್ ಸಮಸ್ಯೆ

ಹೆಸ್ಕಾಂ (HESCOM) ಅಧಿಕಾರಿ ಅಂಜನಪ್ಪ ಮಾಹಿತಿ ನೀಡಿ, “ಗೃಹಬಳಕೆ ವಿದ್ಯುತ್ ಪೂರೈಕೆಗಾಗಿ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತಿದ್ದು, ಸರ್ಕಾರದ ಹೊಸ ನಿರ್ದೇಶನದಂತೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿಗಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದೆ. ವಿಶೇಷವಾಗಿ ಈ ಬಾರಿ ಮಳೆ ಕೊರತೆಯಿಂದಾಗಿ ರೈತರು ಬೆಳೆ ರಕ್ಷಿಸಿಕೊಳ್ಳಲು ಹಗಲಿರುಳು ಪಂಪ್‌ಸೆಟ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ವಿದ್ಯುತ್‌ ಸ್ಥಾವರಗಳ ಮೇಲೆ ಹೆಚ್ಚಿನ ಲೋಡ್ ಬಿದ್ದು ಸಮರ್ಪಕ ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗುತ್ತಿದೆ. ಶಿರಹಟ್ಟಿಯಲ್ಲೇ ಪರಿವರ್ತಕ (ಟ್ರಾನ್ಸ್‌ಫಾರ್ಮರ್) ದುರಸ್ತಿ ಕೇಂದ್ರ ಸ್ಥಾಪನೆಯಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ” ಎಂದರು.

ಇದೇ ವೇಳೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ‘ಯುವನಿಧಿ’ ಯೋಜನೆ ಅನುಷ್ಠಾನದ ಕುರಿತು ಸಭೆಗೆ ಪ್ರಗತಿ ವರದಿ ಮಾಹಿತಿ ನೀಡಿದರು.

ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ (EO) ಆರ್.ವಿ. ದೊಡ್ಡಮನಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಿವನಗೌಡ ಪಾಟೀಲ್, ದೇವಪ್ಪ ಲಮಾಣಿ, ಬುಡನ್‌ಶಾ ಮಕಾನದಾರ, ಮಲ್ಲಪ್ಪ ಹುಯಿಲಗೋಳ, ಸುರೇಶರೆಡ್ಡಿ ಕೆಂಚರೆಡ್ಡಿ, ವಿಶಾಲಾಕ್ಷಿ ಹೊನಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/09/2026 05:04 pm

Cinque Terre

6.48 K

Cinque Terre

0

ಸಂಬಂಧಿತ ಸುದ್ದಿ