ಶೃಂಗೇರಿ : ಕಾಫಿನಾಡಿನ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶೃಂಗೇರಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದ್ದು, ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಬೆಂಗಳೂರು ಮೂಲದ ದರ್ಶನ್ (22) ಮೃತಪಟ್ಟ ದುರ್ದೈವಿ.
ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಆಗಮಿಸಿದ್ದ ನಾಲ್ವರು ಯುವಕರು ಶೃಂಗೇರಿ ಪಟ್ಟಣದ ಗಾಂಧಿ ಮೈದಾನದ ಬಳಿ ತುಂಗಾ ನದಿಗೆ ಸ್ನಾನಕ್ಕೆಂದು ಇಳಿದಿದ್ದಾರೆ. ಈ ವೇಳೆ ನದಿಯ ಆಳದ ಅರಿವಿಲ್ಲದೆ ದರ್ಶನ್ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾನೆ. ಜೊತೆಯಲ್ಲಿದ್ದ ಉಳಿದ ಮೂವರು ಹೇಗೋ ಪ್ರಾಣಾಪಾಯದಿಂದ ಪಾರಾಗಿ ದಡ ಸೇರಿದ್ದಾರೆ. ಆದರೆ, ನೀರಿನ ರಭಸಕ್ಕೆ ಸಿಲುಕಿದ ದರ್ಶನ್ ನೀರಿನಿಂದ ಮೇಲೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಶೃಂಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಯುವಕನ ಮೃತದೇಹಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದರು. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರವಾಸದ ಖುಷಿಯಲ್ಲಿದ್ದ ಯುವಕರ ಮೋಜು-ಮಸ್ತಿ ಕ್ಷಣಾರ್ಧದಲ್ಲೇ ಶೋಕ ಸಾಗರವಾಗಿ ಬದಲಾಗಿದೆ.
PublicNext
19/09/2026 11:51 am
LOADING...