.
ಮೂಡಿಗೆರೆ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ ತಾರಕಕ್ಕೇರಿ, ಬಿಜೆಪಿ ಮುಖಂಡನೊಬ್ಬ ಇಬ್ಬರು ಯುವಕರ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪಟ್ಟಣದ ಎಂ.ಇ.ಎಸ್. ಶಾಲೆಯ ಆಟದ ಮೈದಾನದಲ್ಲಿ ಈ ಕೃತ್ಯ ನಡೆದಿದ್ದು, ಗಣೇಶೋತ್ಸವ ಕಾರ್ಯಕ್ರಮಕ್ಕೆಂದು ಬಂದಿದ್ದ ಕುನ್ನಳ್ಳಿ ಮೂಲದ ಹೃತಿಕ್ ಹಾಗೂ ವಿನಮ್ರತ್ ಎಂಬ ಯುವಕರ ಮೇಲೆ ಬಿಜೆಪಿ ಮುಖಂಡ ಉತ್ತಮ್ ಎಂಬಾತ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ. ಯುವಕರನ್ನು ಮೈದಾನಕ್ಕೆ ಕರೆದೊಯ್ದು ತೀವ್ರವಾಗಿ ಥಳಿಸಲಾಗಿದ್ದು, ಅವರು ನೆಲಕ್ಕೆ ಬಿದ್ದರೂ ಬಿಡದೆ ಮುಖಂಡ ಅಮಾನುಷವಾಗಿ ಹಲ್ಲೆ ಮುಂದುವರಿಸಿದ್ದಾನೆ. ಈ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹೃತಿಕ್ ಮತ್ತು ವಿನಮ್ರತ್ ಅವರನ್ನು ತಕ್ಷಣವೇ ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಹಲ್ಲೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
PublicNext
19/09/2026 12:11 pm
LOADING...