ಚಿಕ್ಕಮಗಳೂರು : ಮುಖ್ಯಮಂತ್ರಿಗಳ ಮಲೆನಾಡು ಪ್ರವಾಸದ ಬೆನ್ನಲ್ಲೇ ಸಿಎಂ ಭೇಟಿಯ ಕುರಿತು ಬಹಿರಂಗ ಪತ್ರ ಬರೆದಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜೇಗೌಡ ನೇರ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿಗಳು ಕೇವಲ ಒಂದೇ ಕಡೆ ಇರದೆ, ಮಂಗಳೂರು, ತೀರ್ಥಹಳ್ಳಿ ಮುಂತಾದ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಮುಗಿಸಿಕೊಂಡು, ಒತ್ತಡದ ವೇಳಾಪಟ್ಟಿಯ ನಡುವೆಯೂ ಚಿಕ್ಕಮಗಳೂರಿನ ಜನತೆಯ ಧ್ವನಿಗೆ ಸ್ಪಂದಿಸಲು ಆಗಮಿಸುತ್ತಿದ್ದಾರೆ. ಆದರೆ, ಪ್ರಬುದ್ಧ ರಾಜಕಾರಣಿ ಎಂದು ಹೇಳಿಕೊಳ್ಳುವ ಸಿ.ಟಿ. ರವಿ ಅವರು ಇದನ್ನು ಸಹಿಸಿಕೊಳ್ಳಲಾಗದೆ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಂಜೇಗೌಡ ವಾಗ್ದಾಳಿ ನಡೆಸಿದ್ದಾರೆ.
ಕಸ್ತೂರಿ ರಂಗನ್ ವರದಿಯ ಸೃಷ್ಟಿಕರ್ತರು ಯಾರು ಎಂಬುದನ್ನು ಬಿಜೆಪಿ ನಾಯಕರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದ ಕೈಗೊಂಬೆಗಳು ಸಿದ್ಧಪಡಿಸಿದ ಈ ವರದಿಯ ವಿರುದ್ಧ ಈ ಹಿಂದೆ ಅಧಿಕಾರದಲ್ಲಿದ್ದಾಗ ಸಿ.ಟಿ. ರವಿ ಯಾಕೆ ಧ್ವನಿ ಎತ್ತಲಿಲ್ಲ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.
ಮಲೆನಾಡಿನ ರೈತರು, ಬೆಳೆಗಾರರು ಹಾಗೂ ಕೂಲಿ ಕಾರ್ಮಿಕರ ರಕ್ಷಣೆಗಾಗಿ ಈಗಲಾದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನು ವಿಪಕ್ಷಗಳು ಮಾಡಬೇಕು. ಹಸಿರು ಪೀಠ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ಜನರಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುವುದನ್ನು ಬಿಟ್ಟು, ಕೇವಲ ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುವುದರಲ್ಲಿ ಅರ್ಥವಿಲ್ಲ. ರೈತ ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಜನರ ಪರವಾಗಿ ಧ್ವನಿ ಎತ್ತಲು ಬಂದಿರುವ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡಿ ಸಹಕರಿಸಬೇಕೆಂದು ಮಂಜೇಗೌಡ ಆಗ್ರಹಿಸಿದ್ದಾರೆ.
PublicNext
19/09/2026 02:46 pm
LOADING...