ಬೆಂಗಳೂರು : ಬೆಳಗಿನ ಜಾವದ ನಸುಕಿನಲ್ಲಿ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಪಾಲಿಗೆ ಅದೇ ಕೊನೆಯ ಪಯಣವಾದ ದಾರುಣ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ನಡೆದಿದೆ. ರಾಯಲ್ ಎನ್ಫೀಲ್ಡ್ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದರ ಗೋಡೆಗೆ ರಭಸವಾಗಿ ಗುದ್ದಿದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಚನ್ ಹಾಗೂ ಪ್ರದೀಪ್ ಮೃತಪಟ್ಟ ದುರದೃಷ್ಟಕರ ವಿದ್ಯಾರ್ಥಿಗಳು. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಇಬ್ಬರೂ ಗೆಳೆಯರು ಸೇರಿ ನೈಟ್ ರೌಂಡ್ಸ್ಗಾಗಿ ತಮ್ಮ ರಾಯಲ್ ಎನ್ಫೀಲ್ಡ್ ಬೈಕ್ನಲ್ಲಿ ಹೊರಟಿದ್ದರು. ರಾಜಾನುಕುಂಟೆ ರಸ್ತೆಯಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೈಕ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ, ರಸ್ತೆ ಬದಿಯಲ್ಲಿದ್ದ ಅಂಗಡಿಯೊಂದರ ಗೋಡೆಗೆ ಬೈಕ್ ಪ್ರಚಂಡ ವೇಗದಲ್ಲಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸದ್ದನ್ನು ಕೇಳಿ ಧಾವಿಸಿ ಬಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಯಲಹಂಕ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
PublicNext
19/09/2026 05:34 pm
LOADING...