ಗುಂಡ್ಲುಪೇಟೆ: ಹಾಲಿನ ದರ ಏರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ದರ ಹೆಚ್ಚಳ ಮಾಡಬೇಕೇ, ಬೇಡವೇ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಗುಂಡ್ಲುಪೇಟೆಯಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡಿದ ಅವರು, ಕಾಲಕಾಲಕ್ಕೆ ಹಾಲಿನ ದರ ಹೆಚ್ಚಳವಾಗುತ್ತಲೇ ಬಂದಿದೆ. ಹಾಲಿನ ದರ ಏರಿಕೆ ಹೊಸ ವಿಚಾರವೇನಲ್ಲ. ಹಾಲಿನ ದರ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ಆದರೆ ಉತ್ಪಾದಕರು ಹಾಗೂ ಗ್ರಾಹಕರು ಇಬ್ಬರ ಹಿತಾಸಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಬೇಕು ಎಂದರು.
ಹಾಲು ಒಕ್ಕೂಟಗಳು ದರ ಏರಿಕೆಗೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಂತಹ ಹೇಳಿಕೆಗಳು ಸರಿಯಲ್ಲ. ಈ ವಿಚಾರದಲ್ಲಿ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದು ಸಚಿವರು ತಿಳಿಸಿದರು.
ಮೇವಿನ ಕೊರತೆ ನೀಗಿಸಲು 25 ಕೋಟಿ ರೂ. ಬಿಡುಗಡೆ:
ರಾಜ್ಯದಲ್ಲಿ ಮೇವಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರೈತರಿಗೆ ಅಗತ್ಯವಿರುವ ಕಡೆ ಮೇವು ಖರೀದಿಸಿ ಪೂರೈಸುವುದರ ಜೊತೆಗೆ ಮೇವಿನ ಬಿತ್ತನೆ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವ ಪ್ರದೇಶಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಪುಟ್ಟರಂಗಶೆಟ್ಟಿ ಹೇಳಿದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಎನ್ಡಿಆರ್ಎಫ್ನಿಂದ ಹಣ ಬಿಡುಗಡೆಯಾದ ಕೂಡಲೇ ರೈತರಿಗೆ ಪರಿಹಾರ ಒದಗಿಸಲಾಗುವುದು. ಬರ ಪರಿಹಾರದ ವಿಚಾರವಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ತಿಳಿಸಿದರು.
ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್ ಗುಂಡ್ಲುಪೇಟೆ
PublicNext
19/09/2026 06:01 pm
LOADING...