ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ಗಳಲ್ಲಿ 0.25 ಟಿಎಂಸಿ ಪ್ರಮಾಣದ ನೀರು ಸಂಗ್ರಹಿಸಲು ವಾಣಿವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಸೆಪ್ಟೆಂಬರ್ 19ರಿಂದ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಸಾರ್ವಜನಿಕರಿಗೆ ವಿಶ್ವೇಶ್ವರಯ್ಯ ಜಲ ನಿಗಮವು ಮುನ್ನೆಚ್ಚರಿಕೆ ಸೂಚನೆ ನೀಡಿದೆ.
ಪ್ರಾದೇಶಿಕ ಆಯುಕ್ತರು ಹಾಗೂ ಕಂದಾಯ ಇಲಾಖೆ ಆಯುಕ್ತರ ಆದೇಶದಂತೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ನದಿ, ಚೆಕ್ ಡ್ಯಾಂ, ಬ್ರಿಡ್ಜ್ ಕಂ ಬ್ಯಾರೇಜ್ ಹಾಗೂ ಹಳ್ಳಗಳ ಪಾತ್ರಗಳಲ್ಲಿ ಜನರು ಸಂಚರಿಸುವುದು, ಈಜುವುದು ಮತ್ತು ಜಾನುವಾರುಗಳನ್ನು ನದಿಗೆ ಇಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸೂಚನೆಗಳನ್ನು ಉಲ್ಲಂಘಿಸುವುದು, ಸರ್ಕಾರದ ಆಸ್ತಿಯಾದ ಕಟ್ಟಡಗಳಿಗೆ ಹಾನಿ ಮಾಡುವುದು ಹಾಗೂ ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯಡಿ ಕಾನೂನುಬಾಹಿರವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಹಾಗೂ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭದ್ರಾ ಮೇಲ್ದಂಡೆ ಯೋಜನಾ ವೃತ್ತದ ಅಧೀಕ್ಷಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
19/09/2026 07:40 pm
LOADING...