ಧಾರವಾಡ: ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಧಾರವಾಡ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಮುಂಬರುವ ವಾರದೊಳಗೆ ಬರ ಘೋಷಣೆಯಾಗುವ ಸಾಧ್ಯತೆಯಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಧಾರವಾಡ-71 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರ ಬೆನ್ನೆಲುಬಾಗಿ ಸರ್ಕಾರ ನಿಲ್ಲಲಿದ್ದು, ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಲಿದೆ ಎಂದರು.
KIDB ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹೊಸವಾಳ, ವೀರಪುರ ಸೇರಿದಂತೆ ವಿವಿಧ ಗ್ರಾಮಗಳ ರೈತರ ಜಮೀನುಗಳ ಗಡಿ ಗುರುತಿಸುವಿಕೆ ಹಾಗೂ ಭೂಮಾಪನ ಕಾರ್ಯದಲ್ಲಿ ಯಾವುದೇ ಗೊಂದಲ ಅಥವಾ ಅನ್ಯಾಯವಾಗದಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಸಹಿಸುವುದಿಲ್ಲ ಎಂದರು.
ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣದ ಲೋಕಾಯುಕ್ತ ತನಿಖೆಯನ್ನು ಸ್ವಾಗತಿಸಿದ ಅವರು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಗ್ಯಾರಂಟಿ ಯೋಜನೆಗಳು ಬಡವರು ಹಾಗೂ ದುರ್ಬಲ ವರ್ಗದ ಕುಟುಂಬಗಳಿಗೆ ಆಸರೆಯಾಗಿವೆ. ಶಾಸಕ ವಿನಯ ಕುಲಕರ್ಣಿ ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕ ಅಮೃತ ದೇಸಾಯಿ ಹಾಗೂ ಮಾಜಿ ಶಾಸಕಿ ಸೀಮಾ ಮಸೂತಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುವುದನ್ನು ಬಿಟ್ಟು ವಾಸ್ತವ ಅರಿತು ಮಾತನಾಡಬೇಕು ಎಂದರು.
ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಕಾಂಗ್ರೆಸ್ ಬದ್ಧವಾಗಿದ್ದು, ಯಾವುದೇ ಅಡೆತಡೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯೆ ದೀಪಾ ನೀರಲಕಟ್ಟಿ, ಚನ್ನಬಸಪ್ಪ ಮೇಟಿ, ಗೀರಿಶ ಕಲ್ಲಾಪುರ, ಕಿಶೋರ ಬಡಿಗೇರ ಸೇರಿದಂತೆ ಇತರರಿದ್ದರು.
Kshetra Samachara
19/09/2026 11:42 pm
LOADING...