ಮಂಗಳೂರು : ಗಡಿ ಭಾಗದ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಡೆಯುತ್ತಿರುವ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’**ದ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ಯಾತ್ರೆಯ ಅಂಗವಾಗಿ ಕಾಸರಗೋಡು ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್ ಅವರನ್ನು ಭೇಟಿಯಾಗಿ ವಿವಿಧ ಕನ್ನಡಪರ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಯಿತು.
ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲಯಾಳಂ ಶಿಕ್ಷಕರನ್ನು ನೇಮಕ ಮಾಡುವ ಕ್ರಮದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಅಭಿಯಾನದ ಪ್ರಮುಖರು, ಕನ್ನಡ ಶಾಲೆಗಳಲ್ಲಿ ಕನ್ನಡ ಭಾಷೆಯ ಬೋಧನೆ ಹಾಗೂ ಕನ್ನಡ ಮಾಧ್ಯಮದ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಅದೇ ರೀತಿ, ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವುದು, ಕನ್ನಡದ ಊರುಗಳ ಹೆಸರುಗಳನ್ನು ಬದಲಾವಣೆ ಮಾಡುವುದನ್ನು ತಡೆಯುವುದು ಹಾಗೂ ಜಿಲ್ಲೆಯ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅಸ್ತಿತ್ವವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ, ಕಾಸರಗೋಡು ಅಧ್ಯಕ್ಷ ವಸಂತ ಬಾರಡ್ಕ, ಈಶ್ವರ್ ಮಾಸ್ಟರ್ ಬದಿಯಡ್ಕ ಸೇರಿದಂತೆ ಕನ್ನಡಪರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಸರಗೋಡು ಜಿಲ್ಲೆಯ ಕನ್ನಡಿಗರ ಭಾಷಾ ಹಕ್ಕುಗಳು, ಕನ್ನಡ ಶಾಲೆಗಳ ಅಸ್ತಿತ್ವ ಮತ್ತು ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಭಿಯಾನದ ಪ್ರಮುಖರು ತಿಳಿಸಿದರು.
Kshetra Samachara
20/09/2026 05:32 am
LOADING...