ನವಲಗುಂದ : ಜಿಲ್ಲಾ ಹಾಗೂ ತಾಲೂಕು ಸ್ವೀಪ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಂಭಾಗ ತಾಲೂಕು ಪಂಚಾಯಿತಿ ಇಒ ರವೀಂದ್ರಗೌಡ ಪಾಟೀಲ ಹಾಗೂ ಮುಖ್ಯಾಧಿಕಾರಿ ಶರಣು ಪೂಜಾರ ಚಾಲನೆ ನೀಡಿದರು.
ಈ ವೇಳೆ ರವೀಂದ್ರಗೌಡ ಪಾಟೀಲ ಮಾತನಾಡಿ, ಅರ್ಹ ನಾಗರಿಕರ ಹೆಸರನ್ನು ಸೇರ್ಪಡೆಗೊಳಿಸಲು ಹಾಗೂ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ, ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು. ಅಗತ್ಯ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬಹುದು ಎಂದರು.
ಮುಖ್ಯಾಧಿಕಾರಿ ಶರಣು ಪೂಜಾರ ಮಾತನಾಡಿ, ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕುವುದು, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಮಾಡಿಸಿಕೊಳ್ಳಲು ಅವಕಾಶವಿದೆ. ನಾಗರಿಕರು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ತಿದ್ದುಪಡಿಗಳನ್ನು ಮಾಡಿಸಲು ಸೆ.20, ಭಾನುವಾರ ಸಂಜೆವರೆಗೆ ಅವಕಾಶವಿದೆ ಎಂದು ಮಾಹಿತಿ ನೀಡಿದರು.
ನಂತರ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ ಭೋವಿ, ಶಿವಯೋಗಿ ಜಂಗನ್ನವರ, ಸಾವಿತ್ರಿ ಮುಶ್ಯಪ್ಪನವರ, ಸುನೀಲ ಡಂಬಳ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
Kshetra Samachara
20/09/2026 10:50 am
LOADING...