ಚಾಮರಾಜನಗರ : ಜಿಲ್ಲೆಯಲ್ಲಿ ಮಿತಿಮೀರಿರುವ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಡರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯೊಂದು ಎರಡು ಕುರಿಗಳನ್ನು ಬಲಿ ಪಡೆದಿರುವ ಘಟನೆ ತಾಲೂಕಿನ ತೆಳ್ಳನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ತಮ್ಮೆಗೌಡ ಎಂಬುವರಿಗೆ ಸೇರಿದ ಕುರಿಗಳ ಮೇಲೆ ದಾಳಿ ನಡೆಸಿದ ಚಿರತೆ, ಸ್ಥಳದಲ್ಲೇ ಅವುಗಳನ್ನು ಕೊಂದು ತಿಂದಿದೆ. ಘಟನೆಯಲ್ಲಿ ತಾಯಿ ಕುರಿ ಮೃತಪಟ್ಟಿದ್ದರೂ, ಅದು ತಿಳಿಯದ ಪುಟ್ಟ ಕುರಿಮರಿಯೊಂದು ತಾಯಿಯನ್ನು ಎಬ್ಬಿಸಲು ಹರಸಾಹಸ ಪಡುತ್ತಾ, ಸತ್ತ ತಾಯಿಯ ಕೆಚ್ಚಲಿಗೆ ಬಾಯಿ ಹಾಕಿ ಹಾಲು ಕುಡಿಯಲು ಯತ್ನಿಸಿದ ಕರುಳು ಹಿಂಡುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರ ಕಣ್ಣಿಗೆ ಬಂದಿದೆ.
ಪ್ರದೇಶದಲ್ಲಿ ಪದೇಪದೆ ಚಿರತೆಗಳು ನಾಡಿಗೆ ಬಂದು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವುದರಿಂದ ಗ್ರಾಮಸ್ಥರು ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಂದಲೆ ನಡೆಸುತ್ತಿರುವ ಚಿರತೆಯನ್ನು ತಕ್ಷಣವೇ ಸೆರೆಹಿಡಿದು, ನಷ್ಟಕ್ಕೊಳಗಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
PublicNext
20/09/2026 12:59 pm
LOADING...