ಗದಗ: ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಅಕ್ಟೋಬರ್ 10ರ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಗದಗ ಶಾಸಕ ಹೆಚ್. ಕೆ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಮುಳಗುಂದದಲ್ಲಿ ಮಾತನಾಡಿದ ಅವರು, ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. “ಗದಗವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಯಾರು ಅಡ್ಡಿಯಾಗಿದ್ದಾರೆ? ಅನ್ಯಾಯ, ಮೋಸವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಪ್ರಶ್ನಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ, ಗದಗದ ಬರ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಸ್ಪಷ್ಟ ಚಿತ್ರಣ ನೀಡಲಾಗಿತ್ತು. ಅಧಿಕಾರಿಗಳ ವರದಿ ಬಳಿಕ ಮುಖ್ಯಮಂತ್ರಿ ಕೂಡ ಕದಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ನಡೆಸಿದ್ದಾರೆ. ಆದರೂ ಗದಗವನ್ನು ಬರಪೀಡಿತ ತಾಲೂಕು ಎಂದು ಘೋಷಿಸಿಲ್ಲ ಎಂದು ಪಾಟೀಲ್ ಹೇಳಿದರು.
ರೈತರ ಪರಿಸ್ಥಿತಿ ಬಗ್ಗೆ ತನಗೆ ಅರಿವಿದ್ದು, ಅವರ ಪರವಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು. ಅಕ್ಟೋಬರ್ 10ರೊಳಗೆ ಗದಗವನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿದ್ದರೆ ವಿಧಾನಸಭೆ ಮೂಲಕ ನೀಡಿರುವ ಗಡುವಿನ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದರು.
PublicNext
20/09/2026 04:11 pm
LOADING...